ಕುಮಾರಸ್ವಾಮಿಯವರದು ಹಿಟ್ ಅಂಡ್ ರನ್ ಇದ್ದಂತೆ, ಅಧಿಕಾರ ದೊರಕದೆ ಹತಾಶರಾಗಿದ್ದಾರೆ. ಕತ್ತಲಲ್ಲಿ ನಿಂತು ಕಲ್ಲೆಸೆದು ಓಡಿಹೋಗುತ್ತಾರೆ ಸಿಎಮ್ ವಾಗ್ದಾಳಿ

ಮಾಜಿ ಮುಖ್ಯಮಂತ್ರಿ HD.ಕುಮಾರಸ್ವಾಮಿ ಅಧಿಕಾರವಿಲ್ಲದೆ ಹತಾಶರಾಗಿದ್ದಾರೆ. ಅವರ ಆರೋಪಗಳು ಹಿಟ್ ಅಂಡ್ ರನ್ ಇದ್ದಂತೆ. ಅವರು ತಮ್ಮ ರಾಜಕೀಯ ಜೀವನದಲ್ಲಿ ಈ ವರೆಗೆ ಮಾಡಿರುವ ಯಾವುದೇ ಒಂದು ಆರೋಪವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ದಿದ್ದಾರ? ಕತ್ತಲಲ್ಲಿ ನಿಂತು ಕಲ್ಲೆಸೆದು ಓಡಿಹೋಗುತ್ತಾರೆ. ಅವರನ್ನು ಗಂಭೀರವಾಗಿ ತೆಗೆದುಕೊಳ್ಳಬೇಕಾದ ಅಗತ್ಯ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ಆಡಳಿತ ವ್ಯವಸ್ಥೆಯಲ್ಲಿ ಅಧಿಕಾರಿಗಳ ವರ್ಗಾವಣೆ ಸಹಜ ಪ್ರಕ್ರಿಯೆ. ಹೊಸ ಸರ್ಕಾರ ಬಂದಾಗ ಆಡಳಿತದ ಹಿತದೃಷ್ಟಿಯಿಂದ ವರ್ಗಾವಣೆ ಮಾಡಲೇಬೇಕಾಗುತ್ತದೆ. ಕಳೆದ ಮಾರ್ಚ್-ಏಪ್ರಿಲ್ ತಿಂಗಳಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದ ಕಾರಣ ವರ್ಗಾವಣೆಯಾಗಿರಲಿಲ್ಲ. ಈಗ ಆ ಸಾಮಾನ್ಯ ವರ್ಗಾವಣೆಗಳೂ ನಡೆಯುತ್ತಿದೆ. ಇದು ನಮ್ಮಿಂದ ಶುರುವಾದುದಲ್ಲ, ಹಿಂದಿನ ಸರ್ಕಾರದಲ್ಲಿಯೂ ನಡೆದಿದೆ, ಮುಂದೆಯೂ ನಡೆಯುತ್ತದೆ. ಹೆಚ್.ಡಿ.ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದಾಗ ವರ್ಗಾವಣೆ ನಡೆದಿರಲಿಲ್ಲವೇ? ಅವರೂ ಹಣ ಪಡೆದೇ ವರ್ಗಾವಣೆ ನಡೆಸಿದ್ದೇ?

ನಾನು ಮುಖ್ಯಮಂತ್ರಿ ಆಗಿದ್ದೇನೆ ಎಂದ ಮಾತ್ರಕ್ಕೆ ನನ್ನ ಪುತ್ರ ಭ್ರಷ್ಟಾಚಾರ ನಡೆಸುತ್ತಿದ್ದಾರೆ ಎನ್ನುವುದು ಕುಮಾರಸ್ವಾಮಿ ಅವರ ಕಲ್ಪನಾ ವಿಲಾಸ. ಇದೇ ವಾದವನ್ನು ಅವರಿಗೆ ಮತ್ತು ಅವರ ಕುಟುಂಬಕ್ಕೆ ಅನ್ವಯಿಸಬಹುದಾ? ಕುಮಾರಸ್ವಾಮಿಯವರ ಅಣ್ಣ ಸಚಿವರಾಗಿದ್ದರು, ಈಗ ಶಾಸಕ, ಇವರ ಪತ್ನಿ ಶಾಸಕಿಯಾಗಿದ್ದರು, ತಂದೆ ಪ್ರಧಾನಿಗಳಾಗಿದ್ದರು, ಅಣ್ಣನ ಮಗ ಸಂಸದ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಅವರ ಕುಟುಂಬದ ಸದಸ್ಯರೆಲ್ಲೂ ಭ್ರಷ್ಟಾಚಾರದಲ್ಲಿ ತೊಡಗಿಸಿಕೊಂಡಿದ್ರಾ? ಎಂದು ವ್ಯಂಗ್ಯಭರಿತವಾಗಿ ಉತ್ತರ ನೀಡಿದ್ದಾರೆ.

Leave a Reply

Your email address will not be published. Required fields are marked *